ವಿಜಯಪುರ: ಹಿಜಾಬ್ ಕೇಸರಿ ಶಾಲ್ನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ ಆಗಿದೆ. ಇನ್ನು ಕೋರ್ಟ್ ಎಲ್ಲರಿಗೂ ಒಂದೇ ಆಗಿದೆ. ಕೋರ್ಟ್ ಹೇಳಿದಂತೆ ನಾವು ಪಾಲನೆ ಮಾಡಬೇಕು. ಕೋರ್ಟ್ ಆದೇಶದಂತೆ ಪ್ರತಿಯೊಬ್ಬರು ನಡೆದುಕೊಳ್ಳಬೇಕು ಎಂದು ಸಂಸದ ರಮೇಶ ಮನವಿ ಮಾಡಿದರು. ಇದೇ ವೇಳೆಯಲ್ಲಿ ವಿಜಯಪುರ ನಗರದ ಇಬ್ರಾಹಿಂಪುರ ಗೇಟ್ ಹತ್ತಿರದ ನಿರ್ಮಾಣ ಹಂತದಲ್ಲಿರುವ ರೇಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಸಂಸದ ರಮೇಶ ಜಿಗಜಿಣಗಿ ವೀಕ್ಷಣೆ ಮಾಡಿ ಪರಿಶೀಲನೆ ನಡೆಸಿದರು. ಅಲ್ಲದೇ, ಸಾರ್ವಜನಿಕರ ಸಂಚಾರಕ್ಕಾಗಿ ಸಮಸ್ಯೆ ಉಂಟಾಗುತ್ತಿರುವುದನ್ನು ಗಮನಿಸಿದ ಸಂಸದ ರಮೇಶ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.