ವಿಜಯಪುರ: ಮುಂಬರುವ ವಿಧಾನ ಸಭೆ ಚುನಾವಣೆಯ ದಿಕ್ಸೂಚಿ ಎಂದೇ ಭಾವಿಸಲಾಗಿರುವ ಮಹಾನಗರ ಪಾಲಿಕೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ನಾಯಕರು ತಮ್ಮ ಎಲ್ಲ ಅಸಮಾಧಾನಗಳನ್ನು ಬದಿಗೊತ್ತಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.
ಸದಾ ಹಾವು ಮುಂಗುಸಿಯಂತೆ ಜಗಳವಾಡುತ್ತಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಒಟ್ಟಾಗಿ ಸಭೆಯಲ್ಲಿ ಭಾಗವಹಿಸುವ ಮೂಲಕ ಕುತೂಹಲ ಮೂಡಿಸಿದರು.
ನಗರದ ಖಾಸಗಿ ಹೋಟೆಲ್ನಲ್ಲಿ
ಕುಡುಚಿ ಶಾಸಕ ಪಿ.ರಾಜೀವ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಚಂದ್ರಶೇಖರ ಕವಟಗಿ ಮತ್ತಿತರರು ಭಾಗಿಯಾಗಿದ್ದರು.
ಅಭ್ಯರ್ಥಿಗಳ ಆಯ್ಕೆ, ಚುನಾವಣೆ ಪ್ರಚಾರ, ಮತಗಟ್ಟೆಗಳಿಗೆ ಪರಿಚಾರಕರ ನೇಮಕ, ಅಭಿವೃದ್ಧಿ ಕಾರ್ಯಕ್ರಮಗಳ ಕುರಿತ ಜನಜಾಗೃತಿ ಹೀಗೆ ಹತ್ತು ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದ್ದು, ಎಲ್ಲರ ಸಹಮತದ ಮೇರೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ನಡೆಸಲು ಒಮ್ಮತದ ನಿರ್ಧಾರಕ್ಕೆ ಬರಲಾಯಿತೆಂದು ಸಭೆಯಲ್ಲಿದ್ದ ಮುಖಂಡರು ತಿಳಿಸಿದರು. ಅಲ್ಲದೇ, ಇದೇ ತರಹ ಬಿಜೆಪಿಯಲ್ಲಿ ಒಗ್ಗಟ್ಟಿನ ಮಂತ್ರ ಮುಂದುವರಿದ್ರೇ ಮತ್ತೇ ನಗರದಲ್ಲಿ ಕಮಲ ಅರಳುವುದರಲ್ಲಿ ಯಾವುದೇ ಅನುಮಾನ ಇಲ್ಲ ಎನ್ನುವಂತಾಗಿದೆ. ಈ ಬಗ್ಗೆ ಕಾಯ್ದುನೋಡಬೇಕಿದೆ.