ವಿಜಯಪುರ: ಬಾಲ್ಯ ವಿವಾಹ ಒಂದು ಸಾಮಾಜಿಕ ಸಮಸ್ಯೆಯಾಗಿದ್ದು, ಇದರ ನಿಯಂತ್ರಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಣ್ಣ ಹೊಸಮನಿ ಅವರು ಹೇಳಿದರು.
ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಹತ್ತಿರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಬಾಲ್ಯ ವಿವಾಹ ನಿಷೇಧ ಅಭಿಯಾನ ಹಾಗೂ ಈ ಕುರಿತು ಜಾಗೃತಿ ಮೂಡಿಸುವ ಎಲ್ಇಡಿ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗದಂತೆ ಸಂಬಂಧಪಟ್ಟ ಇಲಾಖೆಗಳು ಎಚ್ಚರ ವಹಿಸಬೇಕು. ಹಾಗೂ ಸಾರ್ವಜನಿಕರು ಕೂಡ ಇದರ ದುಷ್ಪರಿಣಾಮಗಳ ಬಗ್ಗೆ ಅರಿತುಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ ಅವರು ಮಾತನಾಡಿ ಬಾಲ್ಯ ವಿವಾಹ ಸಮಸ್ಯೆ ನಿವಾರಣೆಗೆ ಸರ್ಕಾರ ಸರ್ವರೀತಿಯಲ್ಲೂ ಸನ್ನದ್ಧವಾಗಿದ್ದು, ಇದಕ್ಕೆ ಸಾರ್ವಜನಿಕರು ಕೂಡ ಸಹಕರಿಸಬೇಕು ಎಂದು ಹೇಳಿದರು.
ಇದೇ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಣ್ಣ ಹೊಸಮನಿ ಹಾಗೂ ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀ ಕೆ ಕೆ ಚವಾನ ಸೇರಿದಂತೆ ಇತರರು ಬಾಲ್ಯವಿವಾಹ ನಿಷೇಧದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಅದರಂತೆ ಶ್ರೀಮತಿ ಪಾಟೀಲ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಬಸವನಬಾಗೇವಾಡಿ ವಿಶ್ವಚೇತನ ಕಲಾತಂಡದಿಂದ ಬಾಲ್ಯ ವಿವಾಹ ನಿಷೇಧದ, ಅರಿವು ಮೂಡಿಸುವ ಕಿರುನಾಟಕ ಪ್ರದರ್ಶಿಸಲಾಯಿತು.
ಮಾನವ ಸರಪಳಿ, ಬಾಲ್ಯವಿವಾಹ ನಿಷೇಧದ ಅರಿವಿನ ಪ್ರಚಾರ ಸಾಮಗ್ರಿ, ಪೋಸ್ಟರ್, ಬಿಡುಗಡೆ ಮಾಡಲಾಯಿತು. ಬಾಲ್ಯ ವಿವಾಹ ನಷೇದ ಅಭಿಯಾನ ಅಂಗವಾಗಿ ಸಹಿ ಸಂಗ್ರಹಣೆ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಜಾಥಾ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಇಂದಿನಿಂದ ಎಲ್ಇಡಿ ವಾಹನದ ಮೂಲಕ ಸತತ 18 ದಿನಗಳವರೆಗೆ ಜಿಲ್ಲೆಯ 20 ಹೋಬಳಿಗಳಲ್ಲಿ ವಿವಿಧ 90 ಸ್ಥಳಗಳಲ್ಲಿ ಬಾಲ್ಯ ವಿವಾಹ ನಿಷೇಧದ ಪ್ರದರ್ಶನ ನಡೆಯಲಿದ್ದು, ಮಾನವ ಸರಪಳಿ, ಸಹಿಸಂಗ್ರಹ ಅಭಿಯಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರೂಪಣಾಧಿಕಾರಿ ಗೀತಾ ಗುತ್ತರಗಿ ಮಠ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್. ಸಿ ಮ್ಯಾಗೇರಿ, ದೀಪಕ್ಷಿ ಜಾನಕಿ, ನಿರ್ಮಲ ಸುರಪುರ, ಅನಿಲ್ ಹಳ್ಳಿ, ಸುಮಂಗಲ ಹಿರೇಮಠ ಮೋದಿನ ಬೇಗ ರಾಯಚೂರ, ಶ್ರೀಮತಿ ಸುನಂದಾ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.