ವಿಜಯಪುರ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಮಹಾನಗರ ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ ಹೇಳಿದರು. ವಿಜಯಪುರ ನಗರದಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಘೋಷಣೆ ಮಾಡಬೇಕು. ಇಲ್ಲದೆ ಹೋದ್ರೆ ರಾಣಿ ಚೆನ್ನಮ್ಮ ಬಳಗದಿಂದ 15 ಸಾವಿರ ಮಹಿಳೆಯರೊಂದಿಗೆ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈಗಾಗಲೇ ವರದಿ ತರಿಸಿಕೊಂಡಿದ್ದು ಬೇಡಿಕೆ ಈಡೇರುವ ಭರವಸೆ ಇದೆ. ಹಾಗೊಂದು ವೇಳೆ ಬೇಡಿಕೆ ಈಡೇರದೇ ಹೋದರೆ ಅಧಿವೇಶನ ವೇಳೆ ಡಿಸೆಂಬರ್ 22ಕ್ಕೆ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ ಎಂದರು.
ಈ ವೇಳೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ ಮಾತನಾಡಿ, ಮೀಸಲಾತಿಗಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕೂಡಲಸಂಗಮ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪಮವರ ಹೋರಾಟ ಮಾಡುತ್ತಿದ್ದಾರೆ. ಇದು ಸಮಾಜದ ಏಳಿಗೆಗಾಗಿ ಹೋರಾಟ ಆಗಿದೆ. ಇದರಲ್ಲಿ ವಿವಿಧ ಪಕ್ಷದ ಹೋರಾಟ ಇಲ್ಲ. ಇದು ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಹೋರಾಟ ಆಗಿದೆ ಎಂದರು.