ವಿಜಯಪುರ: ಜಿಲ್ಲೆಯಲ್ಲಿ ಬೂತ್ ಮಟ್ಟದ ವಿಜಯ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಬರುವ ಜನವರಿ. 21 ರಂದು ರಾಷ್ಟ್ರೀಯ ನಾಯಕ ಜೆ.ಪಿ ನಡ್ಡಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಹೇಳಿದರು. ವಿಜಯಪುರ ನಗರದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9.30 ಕ್ಕೆ ಜ್ಞಾನಯೋಗಾಶ್ರಮದಲ್ಲಿ ಲಿಂಗೈಕ್ಯ ಸಿದ್ಧೇಶ್ವರ ಶ್ರೀಗಳ ದರ್ಶನ ಮುಗಿಸಿ ನಾಗಠಾಣ ಕ್ಷೇತ್ರದಲ್ಲಿ ಮನೆ ಮನೆಗೆ ಭೇಟಿ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ.
ತದನಂತರ 12 ಕ್ಕೆ ಸಿಂದಗಿಯಲ್ಲಿ ಸುಮಾರು ಐವತ್ತು ಸಾವಿರ ಜನರನ್ನು ಸೇರಿಸಿ ಬೃಹತ್ ಸಮಾವೇಶ ನಡೆಸಲಾಗುವುದು. ಸಮಾವೇಶದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಅಶ್ವಥನಾರಾಯಣ, ಗೋವಿಂದ ಕಾರಜೋಳ ಸೇರಿದಂತೆ ನಾಯಕರು ಆಗಮಿಸುತ್ತಾರೆ. ಅಲ್ಲದೇ, ಇಂಡಿ, ನಾಗಠಾಣ, ದೇವರಹಿಪ್ಪರಗಿ ಮತ್ತು ಸಿಂದಗಿ ಕ್ಷೇತ್ರಗಳ ಜನ ಭಾಗವಹಿಸಲಿದ್ದಾರೆ. ಈಗಾಗಲೇ ಎಲ್ಲ ಹಳ್ಳಿಗಳಲ್ಲಿ ಪೂರ್ವಭಾವಿ ಸಭೆ ನಡೆಸಲಾಗುವುದು ಎಂದರು. ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ಶಿವರುದ್ರ ಬಾಗಲಕೋಟ, ಚಂದ್ರಶೇಖರ ಕವಟಗಿ, ಉಮೇಶ ಕಾರಜೋಳ, ಅಶೋಕ ಅಲ್ಲಾಪುರ,ವಿವೇಕಾನಂದ ಡಬ್ಬಿ, ಕೃಷ್ಣಾ ಗುನ್ಹಾಳಕರ, ವಿಜಯ ಜೋಶಿ ಉಪಸ್ಥಿತರಿದ್ದರು.