ವಿಜಯಪುರ: ಲೋಕಸಭೆ ಚುನಾವಣೆ ಹಿನ್ನೆಲೆ ಏಪ್ರಿಲ್. 26ರಂದು ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಜಿಲ್ಲೆಗೆ ಆಗಮಿಸಿ ಪ್ರಚಾರ ನಡೆಸಲಿದ್ದಾರೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11ಕ್ಕೆ ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ನೂತನ ಬಿಎಲ್ ಡಿಇ ಸಂಸ್ಥೆಯ ಬೃಹತ್ ಮೈದಾನದಲ್ಲಿ ಬೃಹತ್ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹಿತ ಅನೇಕ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು. ಕಾಂಗ್ರೆಸ್ ಈಗಾಗಲೇ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರಾಜ್ಯ ವಿಧಾನ ಸಭೆ ಚುನಾವಣೆ ಸಂದರ್ಭ ನೀಡಿದ ಐದು ಗ್ಯಾರಂಟಿ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಇದೀಗ ಲೋಕಸಭೆ ಚುನಾವಣೆಯಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು. ಈ ವಿಷಯದಲ್ಲಿ ಜನರಿಗೂ ಭರವಸೆ ಇದೆ ಎಂದರು. ರೈತರ ಸಾಲಮನ್ನಾ, ರೈತರಿಗೆ ಬೆಳೆಗೆ ಯೋಗ್ಯ ದರ ನಿಗದಿಗೊಳಿಸುವ ನಿಟ್ಟಿನಲ್ಲಿ ಎಂಎಸ್ ಪಿ ಜಾರಿ, ಮಹಿಳೆಯರಿಗೆ ಮತ್ತು ಯುವಕರಿಗೆ ಒಂದು ಲಕ್ಷ ರೂಪಾಯಿ, ಜಾತಿ ಗಣತಿ, ಪ್ರತಿ ವರ್ಷ 30 ಲಕ್ಷ ಉದ್ಯೋಗ ಸೃಷ್ಠಿ, ನರೇಗಾ ಕೂಲಿ ದರ ಹೆಚ್ಚಳ ಹೀಗೆ ಅನೇಕ ಭರವಸೆ ನೀಡಲಾಗಿದ್ದು, ಅಧಿಕಾರಕ್ಕೆ ಬರುತ್ತಿದ್ದಂತೆ ಈ ಎಲ್ಲ ಭರವಸೆ ಈಡೇರಿಸಲಾಗುವುದು ಎಂದರು.