ವಿಜಯಪುರ: ಪಾರದರ್ಶಕವಾಗಿ,ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರೂ ಆದ ಹಾಗೂ ವಿಜಯಪುರ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರಾದ ಡಿ.ರಂದೀಪ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ 2023ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆಯ ಹಕ್ಕು ಮತ್ತು ಆಕ್ಷೇಪಣೆ ಅವಧಿಯಲ್ಲಿ ಸ್ವೀಕೃತವಾದ ಅರ್ಜಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು, ಜಿಲ್ಲೆಯ ಎಂಟು ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ವಿಶೇಷ ಮತದಾರರ ನೋಂದಣಿಗೆ ಆದ್ಯತೆ ನೀಡಬೇಕು. ಪರಿಷ್ಕರಣೆ ಅವಧಿಯಲ್ಲಿ ಸ್ವೀಕೃತವಾಗಿರುವ ಎಂಟು ವಿಧಾನಸಭಾ ಮತಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಸ್ವೀಕೃತವಾಗಿರುವ ನಮೂನೆ-6, ಮತದಾರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಸ್ವೀಕೃತವಾಗಿರುವ ನಮೂನೆ-7 ಹಾಗೂ ಹೆಸರು ತಿದ್ದುಪಡಿಗೆ ಸಂಬಂಧಿಸಿದ ನಮೂನೆ-8 ಅರ್ಜಿಗಳ ಗುಣಮಟ್ಟ, ಅರ್ಜಿಯೊಂದಿಗೆ ಸಲ್ಲಿಸಿದ ನಿಗದಿತ ದಾಖಲೆ-ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.
ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಯುವ-ವಿಶೇಷ ಮತದಾರರ ನೊಂದಣಿ ಪ್ರಮಾಣ ಹೆಚ್ಚಿಸಲು ಆದ್ಯತೆ ನೀಡಬೇಕು. ಮತದಾರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಸ್ವೀಕೃತವಾಗಿರುವ ಅರ್ಜಿಗಳನ್ನು ಚುನಾವಣಾ ಆಯೋಗದ ನಿರ್ದೇಶನದನ್ವಯ ಕೂಲಂಕೂಷವಾಗಿ ಪರಿಶೀಲನೆ ನಡೆಸಿ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಜಿಲ್ಲೆಯ ಎಂಟು ವಿಧಾನಸಭಾ ಮತಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಹಾಗೂ ಮತದಾರ ಪಟ್ಟಿಯಿಂದ ಹೆಸರು ತೆಗೆಯಲು ಅತಿ ಹೆಚ್ಚು ಸ್ವೀಕೃತವಾಗಿರುವ ಮತಗಟ್ಟೆಗಳನ್ನು ಆಯ್ಕೆ ಮಾಡಿಕೊಂಡು ಪರಿಶೀಲನೆ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಉಪ ವಿಭಾಗಾಧಿಕಾರಿಗಳಾದ ಕ್ಯಾ.ಮಹೇಶ ಮಾಲಗಿತ್ತಿ, ರಾಮಚಂದ್ರ ಗಡದೆ, ವಿಜಯಪುರ ತಹಸೀಲ್ದಾರ್ ಸಿದ್ರಾಯ ಭೋಸಗಿ ಉಪಸ್ಥಿತರಿದ್ದರು.
*ಮತಗಟ್ಟೆ ವ್ಯಾಪ್ತಿಯ ಮನೆಗಳಿಗೆ ಭೇಟಿ ಪರಿಶೀಲನೆ* : ಆದರ್ಶನಗರದ ಮತಗಟ್ಟೆ ಸಂಖ್ಯೆ 3 ಮತ್ತು 4ರಲ್ಲಿ ಮನೆ-ಮನೆಗೆ ಭೇಟಿ ನೀಡಿ ತಯಾರಿಸಲಾದ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪರಿಶೀಲನೆ ನಡೆಸಿದ ಮತದಾರ ಪಟ್ಟಿ ವೀಕ್ಷಕ ಡಿ.ರಂದೀಪ್ ಅವರು, ಮತಗಟ್ಟೆ ವ್ಯಾಪ್ತಿಯ ಕೆಲವು ಮನೆಗಳಿಗೆ ಭೇಟಿ ನೀಡಿ ಈ ಕುರಿತು ಪರಿಶೀಲನೆ ನಡೆಸಿದರು. ನಂತರ ನಗರದ ಅಕ್ಕಮಹಾದೇವಿ ರಸ್ತೆಯಲ್ಲಿರುವ ಜೈ ಭವಾನಿ ಸಹಕಾರಿ ಸಂಘದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪಡಿತರ ಸಂಗ್ರಹ, ವಿತರಣೆ ವ್ಯವಸ್ಥೆಯನ್ನು ಪರಿಶೀಲಿಸಿ, ನಿಗದಿತ ಆಹಾರ ನಿಗದಿತ ಸಮಯದಲ್ಲಿ ಗ್ರಾಹಕರಿಗೆ ಹಂಚಿಕೆ ಮಾಡುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ ತಹಶೀಲ್ದಾರ ಸಿದ್ರಾಯ ಭೋಸಗಿ,ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ಸಿದ್ರಾಮ ಮಾರಿಹಾಳ, ಕಂದಾಯ ನಿರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ, ಬಿಎಲ್ಒ ಮೇಲ್ವಿಚಾರಕರು, ಬಿಎಲ್ಒ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.