ವಿಜಯಪುರ: ಶಕ್ತಿ ಯೋಜನೆ ಜಾರಿಗೆ ಹಿನ್ನೆಲೆ, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿ ವಿಜಯಪುರ ತಾಲ್ಲೂಕಿನ ಕಗ್ಗೋಡ ಗ್ರಾಮದಲ್ಲಿ ಬಸ್ ತಡೆದು ಬುಧವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿ ಬೇಕೆ ಬೇಕು ಬಸ್ ಬೇಕೆಂದು ಘೋಷಣೆ ಕೂಗಿದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಕಗ್ಗೋಡ ಗ್ರಾಮಸ್ಥರು ಸಾಥ್ ನೀಡಿದರು. ಸರಿಯಾಗಿ ಶಾಲಾ ಕಾಲೇಜುಗಳ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದರು. ಪೊಲೀಸರ ಮನವರಿಕೆ ಬಳಿಕ ಪ್ರತಿಭಟನೆಯನ್ನು ಕೈ ಬಿಡಲಾಯಿತು.