ವಿಜಯಪುರ: ಜಿಲ್ಲೆಯು ಆನೇಕಾಲು ರೋಗದಿಂದ ಮುಕ್ತವಾಗಬೇಕಾದರೆ ಸಾಮೂಹಿಕ ಔಷಧಿ ಸೇವನೆ ಕಾರ್ಯಕ್ರಮದಲಿ ಎಲ್ಲರೂ ಕಡ್ಡಾಯವಾಗಿ ಮಾತ್ರೆಗಳನ್ನು ಸೇವಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು. ಸಾಮೂಹಿಕ ಔಷಧ ಸೇವನೆಯ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ಆರೋಗ್ಯ ಶಿಕ್ಷಣ ಸಾಮಗ್ರಿಗಳ ಬಿಡುಗಡೆ ಮಾಡಿ ಮಾತನಾಡಿದ ಅವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯ ಆನೆಕಾಲು ರೋಗ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಜಿಲ್ಲೆಯ ಸಿಂದಗಿ ತಾಲೂಕಿನ ಹಾಗೂ ಮುದ್ದೇಬಿಹಾಳ ತಾಲೂಕಿನ ಜನವರಿ 18ರಿಂದ 2 ವರ್ಷ ಮೇಲ್ಪಟ್ಟ ಅಂಗನವಾಡಿ ಮಕ್ಕಳು,ಪ್ರಾಥಮಿಕ, ಪ್ರೌಢಶಾಲೆ,ಪದವಿಪೂರ್ವ ಹಾಗೂ ಪದವಿ ಕಾಲೇಜಿಗಳ ವಿದ್ಯಾರ್ಥಿಗಳಿಗೆ ಹಾಗೂ ಫೆಬ್ರವರಿ 10 ರಿಂದ ಫೆ.29ರವರೆಗೆ ಸಮೂಹದಲ್ಲಿ ಸಾಮೂಹಿಕ ಔಷಧ ನುಂಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಈ ರೋಗ ಶೂನ್ಯಕ್ಕೆ ತರಲು ಕ್ರಮವಹಿಸಬೇಕು. ಜಿಲ್ಲೆಯ ಸಿಂದಗಿ ಹಾಗೂ ಮುದ್ದೇಬಿಹಾಳ ತಾಲೂಕಿನ ಎರಡು ವಲಯಗಳನ್ನು ಆನೆಕಾಲು ರೋಗ ಮುಕ್ತ ತಾಲೂಕು ಮಾಡಲು ಕಡ್ಡಾಯವಾಗಿ ಆನೆಕಾಲು ರೋಗ ನಿವಾರಣೆ ಮಾತ್ರೆಗಳನ್ನು ಸೇವಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದ ಅವರು, ಆಶಾ / ಅಂಗನವಾಡಿ ಕಾರ್ಯಕರ್ತೆಯರು ಮನಮನೆಗೆ ತೆರಳಿ ಔಷಧಿ ನೀಡಲಿದ್ದಾರೆ ಎಂದು ಹೇಳಿದರು. ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಜಿಲ್ಲೆಯ ಜನರಲ್ಲಿ ಆನೆಕಾಲು ರೋಗ ಹರಡದಂತೆ ಮುಂಜಾಗ್ರತಾ ವಹಿಸಲು ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛತಾ ವಹಿಸುವ ಕುರಿತಾಗಿ ಅರಿವು ಮೂಡಿಸಬೇಕು,ರಾಷ್ಡ್ರೀಯ ಆನೇಕಾಲು ರೋಗ ನಿಯಂತ್ರಣ ಕಾರ್ಯಕ್ರಮದ ಸಾಮೂಹಿಕ ಔಷಧಿ ಸೇವಿಸುವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಕಾರ್ಯನಿರ್ವಹಿಸಬೇಕು ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಅವರು ಮಾತನಾಡಿ, ಆನೆಕಾಲು ರೋಗ ನಿವಾರಣೆಗೆ ಈಗಾಗಲೇ ಜಿಲ್ಲೆಯಾದ್ಯಂತೆ ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಬೆಂಡೋಜಾಲ್ ಹಾಗೂ ಡಿಇಸಿ ಮಾತ್ರೆಗಳನ್ನು ಸಹ ಸರಬರಾಜು ಮಾಡಲಾಗಿದೆ. ಸಿಂದಗಿ ತಾಲೂಕಿನ 5 ಪ್ರಾಥಮಿಕ ಆರೋಗ್ಯ ಕೇಂದ್ರಗಳ 225833 ಜನ ಮುದ್ದೇಬಿಹಾಳ ತಾಲೂಕಿನ 5 ಪ್ರಾಥಮಿಕ ಆರೋಗ್ಯ ಕೇಂದ್ರಗಳ 122687 ಜನರಿಗೆ ಮಾತ್ರೆಗಳನ್ನು ಒದಗಿಸುವ ಗುರಿ ಹೊಂದಿದ್ದು, ವಯೋಮಾನ ಅನುಸಾರವಾಗಿ ಮಾತ್ರೆಗಳನ್ನು ಸೇವಿಸಲು ಅರಿವು ಮೂಡಿಸಲಾಗುತ್ತಿದೆ. ಈ ಕುರಿತು ಸಿಬ್ಬಂದಿಗಳಿಗೆ ಸೂಕ್ತ ತರಬೇತುಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಮಾಸ್ತಿಹೊಳಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕವಿತಾ,ಜಿಲ್ಲಾ ರೋಗವಾಹಕ ಅಶ್ರೀತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಜೇಬುನ್ನಿಸಾಬೇಗಂ ಬೀಳಗಿ, ಸೇರಿದಂತೆ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.